ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಜೂನ್ 27ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಸಭಾಭವನದಲ್ಲಿ ನಡೆದ ಸಂಘದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪ್ರಸ್ತುತ ಡಾ. ಚೇತನ್ ಶೆಟ್ಟಿ ಕೋವಾಡಿ ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಸಂಯೋಜನಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಅವರು, ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’ ಸಂಪಾದಕರಾಗಿದ್ದ ಅವಧಿಯಲ್ಲಿ ಸತತ ಮೂರು ವರ್ಷಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಪ್ರಥಮ ಸ್ಥಾನ ದೊರಕುವಂತೆ ಯಶಸ್ವಿಯಾಗಿ ಮುನ್ನಡೆಸಿದ್ದಾರೆ.
ಕರ್ನಾಟಕ ಕರಾವಳಿಯ ಪ್ರಾದೇಶಿಕ ಸಂಸ್ಕೃತಿ ಕುರಿತ ಸಂಶೋಧನೆಗಾಗಿ ಹಿರಿಯ ಸಂಶೋಧಕ ಡಾ. ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಸಿದ್ಧಪಡಿಸಿದ ಡಾ. ಚೇತನ್ ಶೆಟ್ಟಿ ಕೋವಾಡಿ ಅವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ.
ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ, ಹೈಕಾಡಿಯ ಶಿಕ್ಷಕರಾದ ಪ್ರವೀಣ್ ಶೆಟ್ಟಿ ಹರ್ಕೂರು ಹಾಗೂ ಕೋಶಾಧಿಕಾರಿಯಾಗಿ ಸರ್ಕಾರಿ ಪ್ರೌಢಶಾಲೆ, ಗುಜ್ಜಾಡಿಯ ಶಿಕ್ಷಕರಾದ ಅರುಣ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಈ ಕುರಿತು ಸಂಘದ ನಿರ್ಗಮಿತ ಅಧ್ಯಕ್ಷ ನಿತೀಶ್ ಶೆಟ್ಟಿ ಬಸೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dr. Chethan Shetty Kovadi elected as new president of Kundapur Taluk Youth Bunts Sangha


