International Yoga Day celebrated at Sujnan Educational Trust

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪುರ:”ಆಧುನಿಕ ಜಗತ್ತಿನ ಒತ್ತಡದ ಜೀವನದಲ್ಲಿ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಯೋಗ ಅತ್ಯಗತ್ಯ. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮತ್ತು ಏಕಾಗ್ರತೆ ಹೆಚ್ಚಿಸುವಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಪ್ರಖ್ಯಾತ ವೈದ್ಯರಾದ ಡಾ. ದೀಕ್ಷಾ ಶೆಣೈ ಅವರು ನುಡಿದರು.

ಅವರು ಇಲ್ಲಿನ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು, ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಪ್ರೇರಣಾದಾಯಕ ಸಂದೇಶ ನೀಡಿದರು.

“ಇಂದಿನ ಯೋಗಾಭ್ಯಾಸ, ನಾಳಿನ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಆರೋಗ್ಯ, ಸಾಮರಸ್ಯ ಮತ್ತು ಮನಃಶಾಂತಿಯ ಸಂದೇಶವನ್ನು ಸಾರುವ ಯೋಗಾಭ್ಯಾಸದಲ್ಲಿ ಅತ್ಯಂತ ಉತ್ಸಾಹದಿಂದ ಸಕ್ರಿಯವಾಗಿ ಭಾಗವಹಿಸಿದರು. ಸಂಸ್ಥೆಯ ಪ್ರಮುಖರು ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮಗಳನ್ನು ಶಿಸ್ತುಬದ್ಧವಾಗಿ ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತ ತಮ್ಮ ಬದ್ಧತೆಯನ್ನು ತೋರ್ಪಡಿಸಿದರು.

ಕಾರ್ಯಕ್ರಮದ ಕುರಿತು ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಅವರು, “ಯೋಗದಿಂದ ಮನಸ್ಸು ಮತ್ತು ದೇಹ ಎರಡೂ ಚುರುಕುಗೊಳ್ಳುತ್ತವೆ. ಯೋಗವು ನಮ್ಮ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ಹೆಚ್ಚಿಸುತ್ತದೆ. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಕಾರ್ಯಕ್ಷಮತೆ ವೃದ್ಧಿಯಾಗುತ್ತದೆ” ಎಂದರು.

ಮುಂದುವರಿದು ಮಾತನಾಡುತ್ತಾ, “ಅಂತರರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಆಚರಿಸಲಾಗುತ್ತದೆ. ಏಕೆಂದರೆ ಈ ದಿನವು ವರ್ಷದ ಅತ್ಯಂತ ದೀರ್ಘ ಹಗಲಿನ ದಿನವಾಗಿದ್ದು, ಹಗಲು ಹೆಚ್ಚು ಮತ್ತು ರಾತ್ರಿ ಕಡಿಮೆ ಇರುತ್ತದೆ. ಈ ವಿಶೇಷ ದಿನವು ಪ್ರಕೃತಿ ಮತ್ತು ಮಾನವನ ನಡುವಿನ ಸಮತೋಲನವನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಯೋಗದ ಮಹತ್ವವನ್ನು ಸಾರುವ ಉದ್ದೇಶದಿಂದ ಈ ದಿನವನ್ನು ಯೋಗ ದಿನವಾಗಿ ಆಚರಿಸಲಾಗುತ್ತದೆ. ಆರೋಗ್ಯಕರ ಜೀವನಕ್ಕಾಗಿ ಯೋಗ ಅತ್ಯಗತ್ಯ. ‘ಯೋಗ ಮಾಡಿ – ಆರೋಗ್ಯವಾಗಿರಿ’ ಎಂಬ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ ಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿ, ರಾಷ್ಟ್ರೀಯ ಯೋಗ ಪಟು ಲಾಸ್ಯಾ ಮದ್ಯಸ್ಥ ಅವರು ಅದ್ಭುತ ಯೋಗಾಸನಗಳ ಪ್ರದರ್ಶನ ನೀಡಿದರು. ಈ ಅಪೂರ್ವ ಸಾಧನೆಯನ್ನು ಗುರುತಿಸಿ ಸಂಸ್ಥೆಯ ವತಿಯಿಂದ ವಿದ್ಯಾರ್ಥಿನಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಂಸ್ಕೃತ ಶಿಕ್ಷಕ ರಜತ್ ಭಟ್ ಕಾರ್ಯಕ್ರಮ ನಿರೂಪಿಸಿದರು.ವೇದಿಕೆಯಲ್ಲಿ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲರಾದ ಅನಿತಾ ಕುಮಾರಿ ಹಾಗೂ ಉಪ ಪ್ರಾಂಶುಪಾಲರಾದ ಸ್ಪೂರ್ತಿ ಎ. ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

International Yoga Day celebrated at Sujnan Educational Trust

Leave a Comment

Your email address will not be published. Required fields are marked *

Scroll to Top